ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್ ಭಂಡಾರಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಮದ್ಯವರ್ಜನ ಶಿಬಿರಗಳು ಸಾಮಾಜಿಕ ಪರಿವರ್ತನೆಯಲ್ಲಿ ಬಹಳಷ್ಟು ಪರಿಣಾಮ ಬೀರಿದ್ದು ಇಂತಹ ಶಿಬಿರಗಳು ದೇಶವ್ಯಾಪಿ ನಡೆದಾಗ ಸುಭದ್ರ ರಾಷ್ಟ್ರ ನಿರ್ಮಾಣದ ಕನಸು ನನಸಾಗುತ್ತದೆ ಎಂದರು.
ದೇರಳಕಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಮಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಂಗಳೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಮತ್ತು ಪ್ರಗತಿಬಂಧು ಸ್ವಸಹಾಯ ಸಂಘ ಒಕ್ಕೂಟಗಳು ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಬಿರಗಳ ಮೂಲಕ ಕಳೆದ 30 ವರ್ಷಗಳಿಂದ ಅದೆಷ್ಟೋ ಮಂದಿ ಮದ್ಯವ್ಯಸನದಿಂದ ಹೊರಬಂದು ನವಜೀವನ ಪ್ರವೇಶಿಸಿದ್ದು ಸಂತಸದ ವಿಚಾರ. ಇಲ್ಲಿ ಪ್ರಥಮ ಬಾರಿ ಧರ್ಮಸ್ಥಳ ವತಿಯಿಂದ ಶಿಬಿರ ನಡೆಯುತ್ತಿದ್ದು ಇದರ ಯಶಸ್ವಿಗಾಗಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು.
ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮನೋರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಭಟ್ ಯು., ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹಾಬಲ ಚೌಟ, ಜನಜಾಗೃತಿ ವೇದಿಕೆ ಅಧ್ಯಕ್ಷ ಚಂದ್ರಶೇಖರ ಉಚ್ಚಿಲ್, ಕೊಣಾಜೆ ವಲಯಾಧ್ಯಕ್ಷ ಅಚ್ಚುತ ಗಟ್ಟಿ, ತಾಲೂಕು ಅಧ್ಯಕ್ಷ ಸತೀಶ್ ದೀಪಂ, ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ಮೇಲ್ಚಿಚಾರಕಿ ಶಶಿಕಲಾ, ಮೋಹನ್, ಜಯಂತಿ ಮೊದಲಾದವರು ಉಪಸ್ಥಿತರಿದ್ದರು.