ಬೆಂಗಳೂರು

ಮುಂದಿನ ವರ್ಷ ಹೆಚ್ಚುವರಿ ಆದಾಯದ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ 

Published

on

ಬೆಂಗಳೂರು,ಮಾ.14 (Zoom Karnataka): ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಆದಾಯ (ರೆವಿನ್ಯೂ ಸರ್‌ಪ್ಲಸ್) ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ರಾಜ್ಯದ ಸಾಲದ ಕುರಿತು ಆರೋಪ-ಪ್ರತ್ಯಾರೋಪ ನಡೆದು, ಮಾತಿನ ಚಕಮಕಿ ನಡೆಯಿತು.

ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, “4.09 ಲಕ್ಷ ಕೋಟಿ ಗಾತ್ರದ ಬಜೆಟ್​ನಲ್ಲಿ 3.11 ಲಕ್ಷ ಕೋಟಿ ರೂ. ರಾಜಸ್ವ ವೆಚ್ಚವನ್ನು ನಿಗದಿ ಮಾಡಲಾಗಿದೆ. ಇದು ಶೇ.76 ರಷ್ಟಿದ್ದರೆ ಬಂಡವಾಳ ವೆಚ್ಚಕ್ಕೆ ಕೇವಲ ಶೇ.17.4 ರಷ್ಟು ಮೀಸಲಿಡಲಾಗಿದೆ. 71.36 ಸಾವಿರ ಕೋಟಿ ಬಂಡವಾಳ ವೆಚ್ಚದಲ್ಲಿ ಯಾವ ಆಸ್ತಿ ಸೃಜನೆ ಮಾಡಲು ಸಾಧ್ಯ?, ಸಾಲ ಮರುಪಾವತಿಗಾಗಿ 26,470 ಕೋಟಿ ರೂ. ಮೀಸಲಿಡಲಾಗಿದೆ. 19 ಸಾವಿರ ಕೋಟಿ ರಾಜಸ್ವ ಕೊರತೆಯಿದೆ. ರಾಜ್ಯದ ಒಟ್ಟು ಸಾಲ 7.64 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ” ಎಂದು ಹೇಳಿದರು.

ಎಲ್ಲಾ ಉಚಿತ ಕೊಡಲು ಸಾಲದ ಹಣ ದುರ್ಬಳಕೆ-ಅಶೋಕ್: “2021-22ನೇ ಸಾಲಿನಲ್ಲಿ ಕೋವಿಡ್ ನಂತರ ಸಂಕಷ್ಟ ಸಂದರ್ಭದಲ್ಲೂ ರಾಜ್ಯ ಸರ್ಕಾರ 80.641 ಕೋಟಿ ರೂ. ಸಾಲ ಮಾಡಿತ್ತು. 2022-23ನೇ ಸಾಲಿನಲ್ಲಿ 44,549 ಕೋಟಿ ರೂ., 2023-24ನೇ ಸಾಲಿನಲ್ಲಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ 90,280 ಕೋಟಿ, ಕಳೆದ ಬಜೆಟ್‌ನಲ್ಲಿ 1.07 ಕೋಟಿ, ಮುಂದಿ ವರ್ಷಕ್ಕೆ 1.16 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ. ಸಾಲ ಪಡೆದು ಆಸ್ತಿ ಸೃಷ್ಟಿಸಬೇಕೆಂದು 2017ರಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಬಳಿಕ ಸಿದ್ದರಾಮಯ್ಯನವರೂ ಡಲ್ ಆಗಿದ್ದಾರೆ. ಅವರ ಬಜೆಟ್ ಕೂಡ ಡಲ್ ಆಗಿದೆ. ಈಗ ಸಾಲ ಮಾಡಿ ಅವರ ರಾಜಕೀಯ ಪ್ರಣಾಳಿಕೆಯ ಈಡೇರಿಕೆಗೆ ಖರ್ಚು ಮಾಡುತ್ತಿದ್ದಾರೆ. ಎಲ್ಲಾ ಉಚಿತ ಕೊಡಲು ಸಾಲದ ಹಣ ದುರ್ಬಳಕೆಯಾಗುತ್ತಿದ್ದು, ಇದು ಮೋಸ ಮತ್ತು ಅನ್ಯಾಯ ಎಂದು ದೂರಿದರು.

ಅಭಿವೃದ್ಧಿ ಎಂಬುದು ಶೂನ್ಯವಾಗಿದೆ ಎಂದು ಅಶೋಕ್ ಹೇಳುತ್ತಿದ್ದಂತೆಯೇ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಪ್ರತಿ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ದೊರೆಯುತ್ತಿದೆ. ಇದು ಅಭಿವೃದ್ಧಿಯಲ್ಲವೇ ಎಂದು ಪ್ರಶ್ನಿಸಿದರು.

“ಸಾಲದ ಮೊತ್ತವನ್ನೂ ಕಳೆದ ವರ್ಷ 1.81 ಲಕ್ಷ ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿತ್ತು. ಆದರೆ ಅಷ್ಟು ಸಂಗ್ರಹವಾಗಿಲ್ಲ. ಮುಂದಿನ ವರ್ಷದಲ್ಲಿ 2.8 ಲಕ್ಷ ರೂ.ಕೋಟಿ ರೂ. ಆದಾಯದ ಗುರಿ ನಿಗದಿಪಡಿಸಲಾಗಿದೆ. ಅಭಿವೃದ್ಧಿ ಗುರಿಗಿಂತ ಅಬಕಾರಿ ಗುರಿ ಹೆಚ್ಚಾಗಿದೆ. ಜನರನ್ನು ಮದ್ಯಪಾನ ಪ್ರಿಯರನ್ನಾಗಿ ಮಾಡಲಾಗುತ್ತಿದೆ. 16ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ತುಂಬಾ ದುರ್ಬಲರಾಗಿದ್ದಾರೆ. ಮರ ಮುಪ್ಪಾದರೂ ಹುಳಿ ಮುಪ್ಪೇ? ಎಂಬ ಗಾದೆ ಮಾತು ಸಿದ್ದರಾಮಯ್ಯನವರಿಗೆ ಅನ್ವಯವಾಗುವುದಿಲ್ಲ” ಎಂದು ವ್ಯಂಗ್ಯವಾಡಿದರು.

ನಿಯಮಾವಳಿ ಪ್ರಕಾರವೇ ವಿತ್ತೀಯ ಕೊರತೆ ಮತ್ತು ಸಾಲ ಪ್ರಮಾಣ-ಸಿಎಂ: ಮಧ್ಯಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ ಎಂಬುದನ್ನೂ ಹೇಳಬೇಕು. ಸಾಲದ ಹಣವನ್ನು ಆಸ್ತಿ ಸೃಜನೆಗೆ ಖರ್ಚು ಮಾಡಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ನಮ್ಮ ಸರ್ಕಾರ ವಿತ್ತೀಯ ಹೊಣೆಗಾರಿಕೆ ನಿಯಮಾವಳಿ ಅನುಸಾರವೇ ನಡೆದುಕೊಳ್ಳುತ್ತಿದೆ. ರೆವಿನ್ಯೂ ಸರ್‌ಪ್ಲಸ್ ಒಂದನ್ನು ಹೊರತುಪಡಿಸಿ ಉಳಿದಂತೆ ವಿತ್ತೀಯ ಕೊರತೆ ಮತ್ತು ಸಾಲ ಪ್ರಮಾಣ ಎರಡೂ ನಿಯಮಾವಳಿಗಳ ಅನುಸಾರದಲ್ಲಿಯೇ ಇದೆ” ಎಂದು ಹೇಳಿದರು.

“ಕಳೆದ ವರ್ಷ 27 ಸಾವಿರ ಕೋಟಿ ವಿತ್ತೀಯ ಕೊರತೆ ಇತ್ತು. ಈ ವರ್ಷ 19,262 ಕೋಟಿ ರೂ.ಗೆ ಇಳಿಸಲಾಗಿದೆ. ಮುಂದಿನ ವರ್ಷ ಹೆಚ್ಚುವರಿ ಆದಾಯದ ಬಜೆಟ್ ಮಂಡನೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ದೇಶದ ಸಾಲ ಶೇ 56ರಷ್ಟು ಹೆಚ್ಚಳ-ಸಿಎಂ: “ಕೇಂದ್ರದಲ್ಲಿ 2014-15ರವರೆಗೂ 53:11 ಲಕ್ಷ ಕೋಟಿ ಮಾತ್ರ ಸಾಲವಿತ್ತು. ಮೋದಿಯವರು ಪ್ರಧಾನಿಯಾದ ಬಳಿಕ ಅದು ಶೇ.56ರಷ್ಟು ಹೆಚ್ಚಾಗಿದೆ. 2.1 ಲಕ್ಷ ಕೋಟಿಯನ್ನು 2025-26ನೇ ಸಾಲಿನಲ್ಲಿ ಸಾಲವಾಗಿ ಪಡೆಯಲಾಗುತ್ತಿದೆ. ದೇಶದ ಒಟ್ಟು ಸಾಲ 201 ಲಕ್ಷ ಕೋಟಿ ರೂ.” ಎಂದು ವಿವರಿಸಿದರು.

Leave a Reply

Your email address will not be published. Required fields are marked *

Trending

Exit mobile version